ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದಾರೆ.
ಕಳೆದ ಕೆಲ ತಿಂಗಳಿಂದ ಪೆಟ್ರೋಲ್, ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ಸಾರಿಗೆ ನಿಗಮಗಳ ಮೇಲೂ ಇದರ ಪರಿಣಾಮ ಬೀರಿದೆ. ಇಂಧನ ವೆಚ್ಚ ಹೆಚ್ಚಾದರೂ ಬಸ್ ಪ್ರಯಾಣ ದರವನ್ನು ಹೆಚ್ಚಿಸದ ಕಾರಣ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಭಾರಿ ನಷ್ಟ ಅನುಭವಿಸುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.
ಬಸ್ ದರ ಪರಿಷ್ಕರಣೆ ಕುರಿತು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಅಧ್ಯಯನ ನಡೆಸುತ್ತಿದೆ. ಸಮಿತಿ ಶೀಘ್ರದಲ್ಲೇ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಿದೆ.
ವರದಿ ಬಂದ ಬಳಿಕ ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರ ಜೇಬಿಗೆ ಹೆಚ್ಚಿನ ಹೊರೆ ಆಗದಂತೆ ಸ್ವಲ್ಪ ಪ್ರಮಾಣದಲ್ಲಿ ಬಸ್ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.